
ಉದಯಗಿರಿ ಗಲಭೆ ಪ್ರಕರಣದಲ್ಲಿ ಪೊಲೀಸರದ್ದು ಯಾವುದೇ ತಪ್ಪಿಲ್ಲ: ಡಿಕೆ ಶಿವಕುಮಾರ್
ಮೈಸೂರು: ಮೈಸೂರಿನ ಉದಯಗಿರಿ ಗಲಭೆ ಪ್ರಕರಣದಲ್ಲಿ ಪೊಲೀಸರದ್ದು ಯಾವುದೇ ತಪ್ಪಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.
ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಯಾರು ಏನು ಹೇಳಿದರು ಎಂಬುದು ಮುಖ್ಯವಲ್ಲ. ನಾನು ಉಪಮುಖ್ಯಮಂತ್ರಿಯಾಗಿ ಹೇಳುತ್ತಿದ್ದೇನೆ, ಉದಯಗಿರಿ ಗಲಭೆಯಲ್ಲಿ ಪೊಲೀಸರದ್ದು ಯಾವುದೇ ತಪ್ಪಿಲ್ಲ. ಪೊಲೀಸರು ಸರಿಯಾಗಿ ಕೆಲಸ ಮಾಡಿ ಪರಿಸ್ಥಿತಿ ನಿಭಾಯಿಸಿದ್ದಾರೆ ಎಂದರು.
ಉದಯಗಿರಿ ಗಲಭೆಗೆ ಪೊಲೀಸರ ಕರ್ತವ್ಯಲೋಪ ಕಾರಣ ಎಂಬ ಸಚಿವ ಕೆಎನ್ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಡಿಕೆಶಿ, ರಾಜಣ್ಣ ಅವರ ಮಾತಿಗೆ ಮುಖ್ಯಮಂತ್ರಿಗಳು ಉತ್ತರ ಕೊಡುತ್ತಾರೆ. 8-10 ದಿನದಲ್ಲಿ ಮುಖ್ಯಮಂತ್ರಿಗಳೇ ಪ್ರತಿಕ್ರಿಯೆ ಕೊಡುತ್ತಾರೆ. ಮೈಸೂರಿನ ನೆಲದಲ್ಲಿ ನಿಂತು ಹೇಳುತ್ತಿದ್ದೇನೆ, ಪೊಲೀಸರದ್ದು ತಪ್ಪಿಲ್ಲ. ಎಲ್ಲಾ ಮಾಹಿತಿ ಪಡೆದಿದ್ದೇನೆ, ಪೊಲೀಸರು ಅನಾಹುತ ತಪ್ಪಿಸಿದ್ದಾರೆ ಎಂದರು.
ಘಟನೆಯಲ್ಲಿ ಪೊಲೀಸರು ಗಾಯಗೊಂಡರೂ ಸಮಯ ಪ್ರಜ್ಞೆಯಿಂದ ಕೆಲಸ ಮಾಡಿದ್ದಾರೆ. ನಾನು ನಮ್ಮ ಪೊಲೀಸರ ಪರವಾಗಿಯೇ ಇದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದರು.
ಪೊಲೀಸ್ ಠಾಣೆ ಮೇಲೆ ಕಲ್ಲು ಎಸೆದಿರುವವರೆಲ್ಲರೂ 14 ರಿಂದ 15 ವರ್ಷದ ಹುಡುಗರು. ಮುಖಂಡರ ಮಾತನ್ನೂ ಅವರು ಕೇಳಿಲ್ಲ. ಹಿರಿಯರು ಮತ್ತು ಮುಖಂಡರೂ ಸೇರಿ ಗಲಭೆ ನಿಯಂತ್ರಣ ಮಾಡಿದ್ದಾರೆ. ಪೊಲೀಸರು ಗಲಭೆ ಮಾಡಿದವರ ಪತ್ತೆ ಮಾಡುವ ಕೆಲಸ ಮಾಡುತ್ತಿದ್ದಾರೆ. ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡು ಅರೆಸ್ಟ್ ಮಾಡುತ್ತಾರೆ ಎಂದರು.
ಇನ್ನು ಇದೇ ವೇಳೆ ಮೆಟ್ರೋ ಪ್ರಯಾಣ ದರ ಏರಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ, ಬಿಜೆಪಿ ಎಲ್ಲ ವಿಚಾರಗಳಲ್ಲೂ ರಾಜಕೀಯ ಮಾಡುತ್ತಿದೆ. ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರ ಕೇಂದ್ರ ವ್ಯಾಪ್ತಿಗೆ ಬರುತ್ತೆ. ದರ ಏರಿಕೆಗೆ ನೇಮಿಸಿರುವ ಮುಖ್ಯಸ್ಥರು ಅದನ್ನು ನಿರ್ಧಾರ ಮಾಡ್ತಾರೆ. ಮೆಟ್ರೋ ಪ್ರಯಾಣ ದರ ಇಳಿಕೆ ಮಾಡುವುದು ನಮ್ಮ ಕೈಯಲ್ಲಿ ಇಲ್ಲ ಎಂದರು.